ನವದೆಹಲಿ: ಮಕ್ಕಳಿಗೆ ಶಿಕ್ಷಣ ಮಾತೃಭಾಷೆಯಲ್ಲೇ ಕೊಡಬೇಕೋ ಬೇಡವೋ ಎಂಬ ವಿಷಯ ದೀರ್ಘಕಾಲದಿಂದ ಕಗ್ಗಂಟಾಗಿಯೇ ಉಳಿದಿದೆ. ಮಾತ್ರವಲ್ಲ ಈ ವಿಷಯದಲ್ಲಿ ಆಗಾಗ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇರುವುದರಿಂದ, ಮಾತೃಭಾಷೆಯಲ್ಲಿ ಶಿಕ್ಷಣ ಕುರಿತ ವಿಚಾರ ಇನ್ನೂ ಇತ್ಯರ್ಥವಾಗಿಲ್ಲ.
ಇದೀಗ ಈ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಸುಪ್ರೀಂಕೋರ್ಟ್ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. ಒಂದರಿಂದ ಐದನೇ ತರಗತಿವರೆಗೆ ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ಸಂಬಂಧ ಅಲ್ಲಿನ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಹೈಕೋರ್ಟ್ ಆದೇಶ ಮಕ್ಕಳ ಮೇಲೆ ದುಷ್ಪರಿಣಾಮ ಬೀಳುತ್ತದೆ. ಎಲ್ಲ ಮಕ್ಕಳೂ ಇಂಗ್ಲಿಷ್ನಲ್ಲೇ ಶಿಕ್ಷಣ ಪಡೆಯಲು ಬಯಸುತ್ತಿದ್ದಾರೆ ಎಂದು ಸರ್ಕಾರದ ಪರ ವಕೀಲ ಕೆ.ವಿ.ವಿಶ್ವನಾಥನ್ ವಾದ ಮಂಡಿಸಿದರು.
ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ವಿ. ರಾಮಸುಬ್ರಮಣಿಯನ್ ಅವರಿದ್ದ ಪೀಠ ವಾದವನ್ನು ಆಲಿಸಿ, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಮಕ್ಕಳು ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯುವುದು ಅತ್ಯಗತ್ಯ ಎಂದ ಪೀಠ, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.