ಮಂಗಳೂರು: ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮ ವಿಭೂಷಣ ಪ್ರಶಸ್ತಿ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದಂಗಳವರಿಗೆ ಮರಣೋತ್ತರವಾಗಿ ನೀಡಲಾಗಿದ್ದು, ಪ್ರಶಸ್ತಿ ಸ್ವೀಕರಿಸಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿಯವರನ್ನು ನೂರಾರು ಜನರ ಸಮ್ಮುಖದಲ್ಲಿ ಸ್ವಾಗತಿಸಲಾಯಿತು. ಬಳಿಕ ಮಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಕಾಸರಗೋಡಿನ ನಾಗರಿಕರ ಪರವಾಗಿ ಸ್ವಾಮೀಜಿಯವರಿಗೆ ಫಲಪುಷ್ಪ ನೀಡಿ ಗೌರವಿಸಲಾಯಿತು. ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಗ್ರಂಥಾಲಯ ಸ್ಥಾಪಕಾಧ್ಯಕ್ಷ ಕೆ.ವಾಮನ ರಾವ್ ಬೇಕಲ್ ಸ್ವಾಮೀಜಿಯವರಿಗೆ ಹಾರಾರ್ಪಣೆ ಮಾಡಿದರು. ಕನ್ನಡ ಭವನದ ನಿರ್ದೇಶಕ ಪ್ರೊ.ಎ.ಶ್ರೀನಾಥ್ ಕಾಸರಗೋಡು, ಸಂಧ್ಯಾರಾಣಿ ಟೀಚರ್, ಎ.ಆರ್.ಸುಬ್ಬಯ್ಯಕಟ್ಟೆ, ಕೆ.ಜಗದೀಶ್ ಕೂಡ್ಲು ಮೊದಲಾದವರು ಉಪಸ್ಥಿತರಿದ್ದರು.