ನವದೆಹಲಿ: ಇದೇ 18ರಿಂದ ಐದು ದಿನಗಳ ಕಾಲ ನಡೆಯಲಿರುವ ಸಂಸತ್ನ ವಿಶೇಷ ಅಧಿವೇಶನದ ಕಾರ್ಯಸೂಚಿಯನ್ನು ಬುಧವಾರ ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ.
'ಸಂಸತ್ನ 75 ವರ್ಷಗಳ ಪಯಣ' ಕುರಿತು ಉಭಯ ಸದನಗಳಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ, ವಿವಾದಿತ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಆಯುಕ್ತರು (ನೇಮಕಾತಿ, ಕರ್ತವ್ಯದ ನಿಬಂಧನೆಗಳು ಮತ್ತು ಅಧಿಕಾರಾವಧಿ) ಮಸೂದೆ ಸೇರಿದಂತೆ ಐದು ಮಸೂದೆಗಳಿಗೆ ಒಪ್ಪಿಗೆ ಪಡೆಯಲು ಸರ್ಕಾರ ನಿರ್ಧರಿಸಿದೆ.
ಮೊದಲ ದಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಿಧಾನಸಭಾದಿಂದ ಸಂಸತ್ವರೆಗೆ ನಡೆದು ಬಂದು ಸಂಸದೀಯ ಹಾದಿಯಲ್ಲಿನ ಸಾಧನೆಗಳು, ಅನುಭವಗಳು, ನೆನಪುಗಳು ಮತ್ತು ಕಲಿಕೆ ಬಗ್ಗೆ ಚರ್ಚೆ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಲೋಕಸಭೆಯ ಕಲಾಪದಲ್ಲಿ ವಕೀಲರ ಮಸೂದೆ (ತಿದ್ದುಪಡಿ), ನಿಯತಕಾಲಿಕಗಳ ಮುದ್ರಣ ಹಾಗೂ ನೋಂದಣಿ ಮಸೂದೆಯನ್ನು ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ತೀರ್ಮಾನಿಸಿದೆ.
ಮುಂಗಾರು ಅಧಿವೇಶನದಲ್ಲಿ ಈಗಾಗಲೇ ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ ಆಯುಕ್ತರು (ನೇಮಕಾತಿ, ಕರ್ತವ್ಯದ ನಿಬಂಧನೆಗಳು ಮತ್ತು ಅಧಿಕಾರಾವಧಿ) ಮಸೂದೆ, ಅಂಚೆ ಕಚೇರಿ ಮಸೂದೆ ಮಂಡಿಸಲಾಗಿದೆ. ಕೆಳಮನೆಯಲ್ಲಿ ಇವುಗಳನ್ನು ಮಂಡಿಸಿ ಅಂಗೀಕಾರ ಪಡೆಯಲು ನಿರ್ಧರಿಸಿದೆ.
ಅಲ್ಲದೇ, ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದಿರುವ ರದ್ದತಿ ಮತ್ತು ತಿದ್ದುಪಡಿ ಮಸೂದೆಯು ಮೇಲ್ಮನೆಯಲ್ಲಿ ಒಪ್ಪಿಗೆಗೆ ಬಾಕಿ ಇದೆ.
ಈ ನಡುವೆಯೇ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ರಾಜಕೀಯ ಮೀಸಲಾತಿ ಕಲ್ಪಿಸುವ ಮಸೂದೆ, ಏಕರೂಪ ನಾಗರಿಕ ಸಂಹಿತೆ, ಒಂದು ದೇಶ; ಒಂದು ಚುನಾವಣೆ ಅಥವಾ ಇತರೆ ವಿಷಯಗಳ ಬಗ್ಗೆ ಚರ್ಚಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.
ಹಿಂದುಳಿದ ಜಾತಿವಾರು ವರ್ಗೀಕರಣ ನಿಗದಿ ಸಂಬಂಧ ಮಸೂದೆ ಮಂಡಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಕೇಂದ್ರವು ಅಧಿಕೃತ ಪ್ರಕಟಣೆ ನೀಡಿಲ್ಲ.
ಮೊದಲ ದಿನ ಹಳೆಯ ಕಟ್ಟಡದಲ್ಲಿ ಅಧಿವೇಶನ ಆರಂಭವಾಗಲಿದೆ. 19ರಿಂದ ಹೊಸ ಕಟ್ಟಡದಲ್ಲಿ ಕಲಾಪ ನಡೆಯಲಿದೆ ಎನ್ನಲಾಗಿದೆ. ಈ ಬಗ್ಗೆಯೂ ಸರ್ಕಾರ ಮಾಹಿತಿ ನೀಡಿಲ್ಲ.