ಕಾಸರಗೋಡು: ಅಕ್ರಮ ಮರಳು ಸಾಗಾಟದ ವಿರುದ್ಧ ಜಿಲ್ಲಾಧಿಕಾರಿ ಕೆ.ಇನ್ಬಾಪಾಶೇಖರ್ ಖುದ್ದು ಕಾರ್ಯಾಚರಣೆಗಿಳಿದು ಹಲವು ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಮರಳು ತುಂಬಿದ ಲಾರಿ ವಶಪಡಿಸಿಕೊಂಡು ಲಾರಿ ಚಾಲಕ ಯು ಅಬ್ದುಲ್ ಖಾದರ್ ಎಂಬಾತನನ್ನು ಬಂಧಿಸಿದ್ದಾರೆ. ಈತನ ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಕಯ್ಯಾರ್ ಗ್ರೂಪ್ಕುಡಾಲ ಮೇರ್ಕಳ ಗ್ರಾಮದ ಚೇವಾರ್ ರಸ್ತೆಯಲ್ಲಿ ಮರಳು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಮತ್ತು ಮರಳು ಸಾಗಾಣಿಕೆ ತಡೆಯಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೈಗೊಳ್ಳಲಾಗುತ್ತಿರುವ ಕಟ್ಟುನಿಟ್ಟಿನ ಕ್ರಮದ ಅಂಗವಾಗಿ ಕಾರ್ಯಾಚರಣೆ ನಡೆಸಲಾಗಿದೆ. ಮಂಜೇಶ್ವರ ತಾಲೂಕಿನಲ್ಲಿ ಶನಿವಾರ ಆರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಅಕ್ರಮ ಮರಳು ಸಾಗಣೆ, ಕೆಂಪುಕಲ್ಲು ಗಣಿಗಾರಿಕೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.