ಕುಂಬಳೆ: ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ಕಾಸರಗೋಡು ಹಾಗೂ ಕಲ್ಕೂರ ಪ್ರತಿಷ್ಠಾನ ಮಂಗಳೂರು ವತಿಯಿಂದ ನಾಡೋಜ, ಡಾ. ಕಯ್ಯಾರ ಕಿಞಣ್ಣ ರೈ ಜನ್ಮ ದಿನಾಚರಣೆ ಹಾಗೂ ಡಾ. ಕಯ್ಯಾರ ಪ್ರಶಸ್ತಿ ಪ್ರದಾನ ಸಮಾರಂಭ ಜೂ. 11ರಂದು ಬೆಳಗ್ಗೆ 10ಕ್ಕೆ ಪೈವಳಿಕೆ ಪಂಚಾಯಿತಿ ಕಯ್ಯಾರು ಜೋಡುಕಲ್ಲು ಶ್ರೀ ರಾಮಕೃಷ್ಣ ಎಎಲ್ಪಿ ಶಾಲೆಯಲ್ಲಿ ಜರುಗಲಿರುವುದು.
ಕರ್ನಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಮಾರಂಭ ಉದ್ಘಾಟಿಸುವರು. ಮಂಗಳೂರು ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸುವರು. ಈ ಸಂದರ್ಭ ಸಾಹಿತ್ಯ ಸಂಘಟಕರು, ಸಮಾಜಸೇವಕರೂ ಆದ ಆಯಿಷಾ ಎ.ಎ ಪೆರ್ಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಪ್ರಶಸ್ತಿ ಪ್ರದಾನ ಮಾಡುವರು.
ಪೈವಳಿಕೆ ಗ್ರಾಪಂ ಅಧ್ಯಕ್ಷೆ ಜಯಂತಿ, ಮಂಜೇಶ್ವರ ಬ್ಲಾಕ್ ಪಂಚಾಯಿತಿ ಸದಸ್ಯೆ ಫಾತಿಮತ್ ಜೌರಾ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶ್ರೀಧರ ಹೊಳ್ಳ, ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ, ಮಂಜೇಶ್ವರ ಉಪಜಿಲ್ಲಾ ಪ್ರಭಾರ ಶಿಕ್ಷಣಾಧಿಕಾರಿ ಜಿತೇಂದ್ರ ಎಸ್.ಎಚ್ ಮುಖ್ಯ ಅತಿಥೀಯಾಗಿ ಭಾಗವಹಿಸುವರು.