ನವದೆಹಲಿ: ನೆಹರು ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ನರೇಂದ್ರ ಮೋದಿ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ಇಂದು (ಭಾನುವಾರ) ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನವದೆಹಲಿಯ ಕೆಲ ಭಾಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ನೆಹರು ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ನರೇಂದ್ರ ಮೋದಿ ಅವರು ಸತತ 3ನೇ ಬಾರಿಗೆ ಪ್ರಧಾನಿಯಾಗಿ ಇಂದು (ಭಾನುವಾರ) ಪದಗ್ರಹಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ನವದೆಹಲಿಯ ಕೆಲ ಭಾಗಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ರಾಷ್ಟ್ರಪತಿ ಭವನದ ಸುತ್ತಲೂ ಅರೆಸೇನಾ ಸಿಬ್ಬಂದಿ, ಎನ್ಎಸ್ಜಿ ಕಮಾಂಡೋಗಳು ಮತ್ತು ಸ್ನೈಪರ್ಗಳನ್ನು ಒಳಗೊಂಡ ಬಹು ಹಂತದ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡ್ರೋನ್ ಕಣ್ಗಾವಲೂ ಇದೆ.
ಅರೆಸೇನಾಪಡೆ ಮತ್ತು ದೆಹಲಿ ಸಶಸ್ತ್ರ ಪೊಲೀಸ್ (ಡಿಎಪಿ) ಸಿಬ್ಬಂದಿ ಸೇರಿದಂತೆ 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಸ್ಥಳದ ಸುತ್ತಲೂ ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) 293 ಸ್ಥಾನಗಳನ್ನು ಗೆದ್ದಿದ್ದು, ಸರ್ಕಾರ ರಚನೆಗೆ ಸಿದ್ದವಾಗಿದೆ. ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಇಂದು ಸಂಜೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಪ್ರಮಾಣ ವಚನ ಸಮಾರಂಭಕ್ಕೆ ಸಾರ್ಕ್ (ದಕ್ಷಿಣ ಏಷ್ಯಾದ ಪ್ರಾದೇಶಿಕ ಸಹಕಾರ ಸಂಘ) ರಾಷ್ಟ್ರಗಳ ಗಣ್ಯರು ಹಾಗೂ 10 ಮಂದಿ ಲೋಕೋ ಪೈಲೆಟ್ಗಳಿಗೆ ಆಹ್ವಾನ ನೀಡಲಾಗಿದೆ.
ಬಾಂಗ್ಲಾ ಅಧ್ಯಕ್ಷೆ ಶೇಖ್ ಹಸೀನಾ, ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಹಾಗೂ ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜಗನ್ನಾಥ್ ಈಗಾಗಲೇ ದೆಹಲಿಗೆ ಆಗಮಿಸಿದ್ದಾರೆ. ಇವರಲ್ಲದೆ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್ಗೇ ಸಮಾರಂಭದಲ್ಲಿ ಭಾಗವಹಿಸುವ ಇತರ ಪ್ರಮುಖ ನಾಯಕರು.