HEALTH TIPS

ಇಂದಿರಾ ಗಾಂಧಿಯನ್ನು 'ಭಾರತ ಮಾತೆ' ಎಂದು ಬಣ್ಣಿಸಿದ ಕೇಂದ್ರ ಸಚಿವ ಸುರೇಶ್ ಗೋಪಿ

            ತ್ರಿಶೂರ್ : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 'ಭಾರತ ಮಾತೆ' ಇದ್ದಂತೆ ಹಾಗೂ ಕೇರಳದ ಮಾಜಿ ಮುಖ್ಯಮಂತ್ರಿ ಕೆ.ಕರುಣಾಕರನ್‌ ಅವರು 'ಧೈರ್ಯಶಾಲಿ ಆಡಳಿತಗಾರ' ಎಂದು ಕೇಂದ್ರ ಸಚಿವ ಸುರೇಶ್ ಗೋಪಿ ಬಣ್ಣಿಸಿದ್ದಾರೆ.

             ಕರುಣಾಕರನ್‌ ಹಾಗೂ ಮಾರ್ಕ್ಸ್‌ವಾದಿ ಇ.ಕೆ.ನಾಯನಾರ್ ಅವರು ನನ್ನ ರಾಜಕೀಯ ಗುರುಗಳು ಎಂದು ಸುರೇಶ್ ಗೋಪಿ ಹೇಳಿಕೊಂಡಿದ್ದಾರೆ.

            ಪುನ್‌ಕುನ್‌ನಲ್ಲಿರುವ ಕರುಣಾಕರನ್ ಅವರ ಸ್ಮಾರಕ 'ಮುರಳಿ ಮಂದಿರಂ'ಗೆ ಭೇಟಿ ನೀಡಿ ನಮನ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರುಣಾಕರನ್ ಅವರು 'ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪಿತಾಮಹ' ಎಂದು ಕೊಂಡಾಡಿದ್ದಾರೆ.

            ನಾನು ನನ್ನ ರಾಜಕೀಯ ಗುರುಗಳಿಗೆ (ಕರುಣಾಕರನ್) ಗೌರವ ಸಲ್ಲಿಸಲು ಬಂದಿದ್ದೇನೆ. ಸ್ಮಾರಕಕ್ಕೆ ಭೇಟಿ ನೀಡಿರುವುದಕ್ಕೆ ಯಾವುದೇ ರಾಜಕೀಯ ಅರ್ಥವನ್ನು ಕಲ್ಪಿಸಬಾರದು ಎಂದು ಅವರು ಹೇಳಿದ್ದಾರೆ.

               ನಾಯನಾರ್ ಮತ್ತು ಅವರ ಪತ್ನಿ ಶಾರದಾ ಹಾಗೂ ಕರುಣಾಕರನ್ ಮತ್ತು ಅವರ ಪತ್ನಿ ಕಲ್ಯಾಣಿಕುಟ್ಟಿ ಅಮ್ಮ ಅವರೊಂದಿಗೆ ಉತ್ತಮ ಆತ್ಮೀಯತೆ ಹೊಂದಿರುವುದಾಗಿ ಗೋಪಿ ತಿಳಿಸಿದ್ದಾರೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ನಿಕಟವರ್ತಿ ಎಂದು ಗುರುತಿಸಿಕೊಂಡಿರುವ ಸುರೇಶ್‌ ಗೋಪಿ ಅವರು ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಕೇರಳ ಮುಖ್ಯಮಂತ್ರಿಯಾಗಿದ್ದ ದಿ. ಕರುಣಾಕರನ್ ಅವರ ಪುತ್ರ ಕಾಂಗ್ರೆಸ್‌ ಅಭ್ಯರ್ಥಿ ಮುರಳೀಧರನ್ ವಿರುದ್ಧ 74,686 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

              ಕೇರಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಸುರೇಶ್‌ ಗೋಪಿ ಅವರು ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಈಚೆಗೆ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಚಿತ್ರರಂಗದಲ್ಲಿ ಮುಂದುವರಿಯುವ ಬಯಕೆ ವ್ಯಕ್ತಪಡಿಸಿದ್ದ ಅವರು ಸಚಿವ ಸ್ಥಾನವನ್ನು ತ್ಯಜಿಸಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಅವರು, 'ನಾನು ಮೋದಿ ಸರ್ಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಮಗಳು ತಪ್ಪು ಸುದ್ದಿಯನ್ನು ಹರಡುತ್ತಿವೆ. ಇದು ಊಹಾಪೋಹವಷ್ಟೇ, ಇದು ಸತ್ಯಕ್ಕೆ ದೂರವಾಗಿದೆ. ಮೋದಿ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುವುದು ಮತ್ತು ಸಂಸತ್‌ನಲ್ಲಿ ಕೇರಳದ ಜನರನ್ನು ಪ್ರತಿನಿಧಿಸುವುದು ನನಗೆ ಹೆಮ್ಮೆಯ ವಿಷಯ' ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries