HEALTH TIPS

ಮಣಿಪುರ ಸಚಿವರ ನಿವಾಸದ ಮೇಲೆ ಗ್ರೆನೇಡ್ ದಾಳಿ

        ಇಂಫಾಲ್: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿರುವ ಸಚಿವ ಕಾಸಿಂ ವಶುಮ್ ಅವರ ನಿವಾಸದ ಮೇಲೆ ಶಂಕಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

           ಶನಿವಾರ ತಡರಾತ್ರಿ ನಡೆದ ಈ ಘಟನೆಯಲ್ಲಿ ಸಚಿವರ ಮನೆಯ ಗೋಡೆಗಳು ಸೇರಿದಂತೆ ಇತರೆ ಭಾಗಗಳಿಗೆ ಹಾನಿಯಾಗಿದೆ.

           ಆದರೆ, ಯಾರಿಗೂ ಗಾಯಗಳಾಗಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಳಿಯ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

            ವಶುಮ್ ಅವರು ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯ ಮಿತ್ರಪಕ್ಷವಾದ ನಾಗಾ ಪೀಪಲ್ಸ್‌ ಫ್ರಂಟ್‌ನ (ಎನ್‌ಪಿಎಫ್) ಶಾಸಕರಾಗಿದ್ದಾರೆ. ಗ್ರೆನೇಡ್ ದಾಳಿ ನಡೆದ ಸಂದರ್ಭದಲ್ಲಿ ನಾನು ಸೇರಿದಂತೆ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ ಎಂದು ವಶುಮ್ ಹೇಳಿದ್ದಾರೆ.

ನಾಗಾ ಬುಡಕಟ್ಟು ಸಂಘಟನೆಗಳು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿವೆ.

            ಈಚೆಗೆ ನಡೆದ ಉಗ್ರರ ದಾಳಿಯನ್ನು ಎದುರಿಸಲು ಅಸಮರ್ಥರಾಗಿದ್ದಾರೆ ಎಂದು ಆರೋಪಿಸಿ ಡಿಜಿಪಿ ಹಾಗೂ ಭದ್ರತಾ ಸಲಹೆಗಾರರನ್ನು ಪದಚ್ಯುತಗೊಳಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭಿಸಿದ್ದ ಹಿನ್ನೆಲೆಯಲ್ಲಿ ಸೆ.10ರಂದು ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೊಲೀಸರು ಸೇರಿದಂತೆ ಒಟ್ಟು 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

            ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಸಂಘರ್ಷ ಆರಂಭವಾದಾಗಿನಿಂದ 226 ಜನರು ಮೃತಪಟ್ಟಿದ್ದು, 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries