ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಡಾಡಿ ದನಗಳಿಂದ ಆಗುತ್ತಿರುವ ಅಪಘಾತ ತಪ್ಪಿಸುವ ನಿಟ್ಟಿನಲ್ಲಿ ಹೆದ್ದಾರಿ ಬದಿಯಲ್ಲಿ ಪ್ರಾಯೋಗಿಕವಾಗಿ ಗೋಶಾಲೆ ತೆರೆಯಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಮುಂದಾಗಿದೆ.
ಬಿಡಾಡಿ ದನಗಳ ಹಾವಳಿಯಿಂದ ಪ್ರಯಾಣಿಕರ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.
ದನಗಳು ಹಾಗೂ ಇತರೆ ಪ್ರಾಣಿಗಳಿಂದ ವಾಹನಗಳ ಸಂಚಾರಕ್ಕೆ ಆಗುತ್ತಿರುವ ತೊಂದರೆ ತಪ್ಪಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಪ್ರಾಧಿಕಾರವು ಮಂಗಳವಾರ ತಿಳಿಸಿದೆ.
0.21ರಿಂದ 2.29 ಹೆಕ್ಟೇರ್ ಪ್ರದೇಶದಲ್ಲಿ ಗೋಶಾಲೆ ನಿರ್ಮಿಸಲಾಗುವುದು ಎಂದು ಹೇಳಿದೆ.
ದೇಶದ ಎಲ್ಲಾ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಗೋಶಾಲೆ ತೆರೆಯಲಾಗುತ್ತದೆ. ಆರಂಭದಲ್ಲಿ ಉತ್ತರಪ್ರದೇಶ/ ಹರಿಯಾಣದ ಗಡಿ ಭಾಗದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 334ಬಿ ವ್ಯಾಪ್ತಿಯಲ್ಲಿ ಗೋಶಾಲೆ ತೆರೆಯಲಾಗುತ್ತಿದೆ. ಈ ಕುರಿತು ಗವಾರ್ ಕನ್ಸ್ಟ್ರಕ್ಷನ್ ಕಂಪನಿ ಜೊತೆಗೆ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ತಿಳಿಸಿದೆ.
ಈ ಗೋಶಾಲೆಗಳಲ್ಲಿ ತುರ್ತು ಚಿಕಿತ್ಸೆ, ಮೇವು, ನೀರಿನ ಸೌಲಭ್ಯ ಕಲ್ಪಿಸಲಾಗುವುದು. ಅಲ್ಲದೆ, ಅವುಗಳ ಆರೋಗ್ಯದ ಮೇಲೆ ನಿಗಾ ಇಡಲು ಸಿಬ್ಬಂದಿಯನ್ನು ನೇಮಿಸಲಾಗುತ್ತದೆ ಎಂದು ತಿಳಿಸಿದೆ.
ಅಪಘಾತಗಳಿಂದ ಗಾಯಗೊಳ್ಳುವ ಪ್ರಾಣಿಗಳ ಚಿಕಿತ್ಸೆ ಹಾಗೂ ಆರೈಕೆಗಾಗಿ ಪ್ರತಿ 50 ಕಿ.ಮೀ. ಅಂತರದಲ್ಲಿ ಪಶು ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ಈ ಸೌಲಭ್ಯ ಒದಗಿಸಲಾಗುತ್ತದೆ ಎಂದು ವಿವರಿಸಿದೆ.