ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರು 30 ದಿನಗಳ 'ಪೆರೋಲ್' ಮೇಲೆ ಜೈಲಿನಿಂದ ಇಂದು (ಮಂಗಳವಾರ) ಬಿಡುಗಡೆಯಾಗಿದ್ದಾರೆ.
ಹರಿಯಾಣದ ರೋಹ್ಟಕ್ನಲ್ಲಿರುವ ಸುನಾರಿಯಾ ಜೈಲಿನಿಂದ ಬಿಗಿ ಭದ್ರತೆಯ ನಡುವೆ ಗುರ್ಮೀತ್ ರಾಮ್ ರಹೀಮ್ ಸಿಂಗ್ ಬಿಡುಗಡೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
2017ರಲ್ಲಿ ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಗುರ್ಮೀತ್ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಫೆಬ್ರುವರಿ 5ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಫೆ.8ರಂದು ಫಲಿತಾಂಶ ಹೊರಬೀಳಲಿದೆ. ಈ ವೇಳೆ ಗುರ್ಮೀತ್ಗೆ ಪೆರೋಲ್ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಸಿರ್ಸಾ ಡೇರಾ ಸಚ್ಚಾ ಸೌದಾ ಪಂಥವು ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ಇತರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ.
ಹರಿಯಾಣದ ಸಿರ್ಸಾ, ಫತೇಹಾಬಾದ್, ಕುರುಕ್ಷೇತ್ರ, ಕೈತಾಲ್ ಮತ್ತು ಹಿಸಾರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಡೇರಾ ಸೌದಾ ಪಂಥವು ಸಾಕಷ್ಟು ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ.