ನವದೆಹಲಿ: ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ, ಹೈಕೋರ್ಟ್ನಲ್ಲಿ ತಾತ್ಕಾಲಿಕ ನ್ಯಾಯಮೂರ್ತಿಗಳ ನೇಮಕಕ್ಕೆ ಇದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಗುರುವಾರ ಸಡಿಲಗೊಳಿಸಿದೆ. ನಿವೃತ್ತ ನ್ಯಾಯಮೂರ್ತಿಗಳು ವಿಭಾಗೀಯ ಪೀಠಗಳಲ್ಲಿ ಹಾಲಿ ನ್ಯಾಯಮೂರ್ತಿಗಳ ಜೊತೆ ಕುಳಿತು ವಿಚಾರಣೆ ನಡೆಸಬಹುದು ಎಂದು ಹೇಳಿದೆ.
ಮಂಜೂರಾದ ನ್ಯಾಯಮೂರ್ತಿಗಳ ಹುದ್ದೆಗಳ ಪೈಕಿ ಖಾಲಿ ಹುದ್ದೆಗಳು ಶೇಕಡ 20ರಷ್ಟಕ್ಕಿಂತ ಹೆಚ್ಚಿದ್ದರೆ ಮಾತ್ರ ತಾತ್ಕಾಲಿಕ ಅವಧಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡಬಹುದು ಎಂದು 2021ರ ಏಪ್ರಿಲ್ನಲ್ಲಿ ನೀಡಿದ್ದ ತೀರ್ಪೊಂದರಲ್ಲಿ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರು ಇರುವ ತ್ರಿಸದಸ್ಯ ಪೀಠವು ಅಮಾನತಿನಲ್ಲಿ ಇರಿಸಿತು.
ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆಯು ದೊಡ್ಡ ಮಟ್ಟದಲ್ಲಿ ಇರುವ ಕಾರಣಕ್ಕೆ ಸುಪ್ರೀಂ ಕೋರ್ಟ್ ಈ ತೀರ್ಮಾನ ಕೈಗೊಂಡಿದೆ. ಇಬ್ಬರು ಅಥವಾ ಐದು ಮಂದಿ ನ್ಯಾಯಮೂರ್ತಿಗಳನ್ನು ಹೈಕೋರ್ಟ್ಗಳು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಬಹುದು. ಆದರೆ ಈ ಬಗೆಯ ನೇಮಕಗಳ ಒಟ್ಟು ಸಂಖ್ಯೆಯು ಮಂಜೂರಾದ ಒಟ್ಟು ಹುದ್ದೆಗಳ ಶೇಕಡ 10ಕ್ಕಿಂತ ಹೆಚ್ಚಾಗಬಾರದು ಎಂದು ಪೀಠ ಹೇಳಿದೆ.