ಇಂಫಾಲ್: ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಾಲ್ಕು ದಿನಗಳ ನಂತರ ರಾಜ್ಯದಲ್ಲಿ ಗುರುವಾರ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.
ಅಲ್ಲದೆ, ರಾಜ್ಯದ ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿರಿಸಲಾಗಿದೆ.
ಸಂವಿಧಾನದ ನಿಬಂಧನೆಗಳಿಗೆ ಅನುಗುಣವಾಗಿ ಮಣಿಪುರದಲ್ಲಿ ರಾಜ್ಯ ಸರ್ಕಾರವನ್ನು ನಡೆಸಲಾಗದ ಪರಿಸ್ಥಿತಿ ಉದ್ಭವಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಭಿಪ್ರಾಯಪಟ್ಟಿರುವುದಾಗಿ ಗೃಹ ಸಚಿವಾಲಯವು ಹೊರಡಿಸಿದ ಅಧಿಸೂಚನೆಯಲ್ಲಿ ಹೇಳಿದೆ.
ಸಂವಿಧಾನದ 356ನೇ ವಿಧಿಯಡಿ ದತ್ತವಾಗಿರುವ ಅಧಿಕಾರವನ್ನು ಬಳಸಿ ಆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿದೆ. ರಾಜ್ಯದ ಆಡಳಿತವನ್ನು ರಾಜ್ಯಪಾಲರು ನಿರ್ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ಹೇಳಿದೆ.
ಇದೇ ಫೆ. 9ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ ಘೋಷಿಸಿದ್ದರು. ಆ ಬಳಿಕ ಉತ್ತರಾಧಿಕಾರಿ ಆಯ್ಕೆಗೆ ಆಡಳಿತಾರೂಢ ಮಿತ್ರಪಕ್ಷಗಳಲ್ಲಿ ಒಮ್ಮತ ಮೂಡದೆ, ನೂತನ ಮುಖ್ಯಮಂತ್ರಿ ಆಯ್ಕೆ ವಿಳಂಬವಾಗಿರುವುದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಲಾಗಿದೆ.