ವಯನಾಡ್: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರವೊಂದು ಸಂವಿಧಾನ ಮತ್ತು ಪ್ರಜಾಭುತ್ವವನ್ನು ದುರ್ಬಲಗೊಳಿಸಲು ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಎನ್ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇರಳದ ಏರನಾಡ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, 'ಇಂದು ನಾವು ಹೋರಾಡುತ್ತಿರುವುದು ಕೇವಲ ನಮ್ಮ ರಾಜಕೀಯಕ್ಕಾಗಿ ಅಥವಾ ನಮ್ಮ ಸಿದ್ಧಾಂತಕ್ಕಾಗಿ ಅಲ್ಲ, ಈ ಹೋರಾಟ ದೇಶದ ಮೂಲಸತ್ವವನ್ನು ರಕ್ಷಿಸಲು ಮತ್ತು ನಮ್ಮ ರಾಷ್ಟ್ರವನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆ ಎನ್ನುವುದನ್ನು ನೀವು ಅರ್ಥಮಾಡಿಕೊಳ್ಳಬೇಕು' ಎಂದರು.
ವಯನಾಡ್ನಲ್ಲಿ ನಡೆಯುತ್ತಿರುವ ಮಾನವ- ಪ್ರಾಣಿ ಸಂಘರ್ಷದ ಕುರಿತು ಮಾತನಾಡಿ, 'ಸುಧಾರಿತ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು, ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ' ಎಂದರು.
'ಪ್ರಾಣಿಗಳು ಮಾನವರ ಮೇಲೆ ನಡೆಸುತ್ತಿರುವ ದಾಳಿಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪರಿಹಾರ ನೀಡಲಾಗುವುದು. ಅಲ್ಲದೆ, ಅರಣ್ಯ ಸಿಬ್ಬಂದಿ ಸೇರಿ ಕಾಡಿನಲ್ಲಿ ಕೆಲಸ ಮಾಡುವ ಎಲ್ಲರಿಗೂ ಹೆಚ್ಚಿನ ಭದ್ರತೆ ನೀಡುವಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು' ಎಂದು ಭರಸವೆ ನೀಡಿದರು.