ನವದೆಹಲಿ: ಮತದಾರರ ಪಟ್ಟಿಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಲೋಕಸಭೆಯ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಎಲ್ಲಾ ವಿಪಕ್ಷಗಳು ಈ ಬಗ್ಗೆ ಚರ್ಚೆ ನಡೆಸುವಂತೆ ಒತ್ತಾಯಿಸುತ್ತಿವೆ ಎಂದು ಹೇಳಿದ್ದಾರೆ.
'ಮತದಾರರ ಪಟ್ಟಿಯನ್ನು ಸರ್ಕಾರ ರಚಿಸುವುದಿಲ್ಲ ಎಂಬ ನಿಮ್ಮ ವಾದವನ್ನು ನಾವು ಒಪ್ಪಿಕೊಳ್ಳುತ್ತೇವೆ. ಅಂತೆಯೇ ಈ ವಿಷಯದ ಬಗ್ಗೆ ಚರ್ಚೆ ನಡೆಸಲು ನಾವು ಆಗ್ರಹಿಸುತ್ತೇವೆ' ಎಂದಿದ್ದಾರೆ.
ದೇಶದಾದ್ಯಂತ ಮತದಾರರ ಪಟ್ಟಿಯ ಕುರಿತು ಪ್ರಶ್ನೆಗಳು ಎದ್ದಿವೆ. ಮಹಾರಾಷ್ಟ್ರ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿಯೂ ವಿರೋಧ ಪಕ್ಷಗಳು ಈ ಬಗ್ಗೆ ಪ್ರಶ್ನೆ ಮಾಡುತ್ತಿವೆ' ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ, ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರಾಯ್, ಮತದಾರರ ಪಟ್ಟಿ ದೋಷದಿಂದ ಕೂಡಿದೆ ಎಂದು ಆರೋಪಿಸಿದ್ದರು.
ನಮ್ಮ ಸರ್ಕಾರದ ನಿಯೋಗವು ಹೊಸದಾಗಿ ನೇಮಕಗೊಂಡಿರುವ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಹೇಳಿದ್ದರು.
'ಮತದಾರರ ಪಟ್ಟಿಯಲ್ಲಿ ಗಂಭೀರವಾದ ನೂನ್ಯತೆಯಿದೆ. ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆಗಳಲ್ಲಿ ಈ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿದ್ದವು. ಮುಂದಿನ ವರ್ಷ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿದ್ದು, ಅಲ್ಲಿಯೂ ಇದನ್ನು ಮುಂದುವರಿಸಲು ಯತ್ನಿಸುತ್ತಿದ್ದಾರೆ' ಎಂದು ರಾಯ್ ಹೇಳಿದ್ದರು.