ನವದೆಹಲಿ: ಸ್ತನಗಳನ್ನು ಹಿಡಿದುಕೊಳ್ಳುವುದು, ಪೈಜಾಮಾದ ದಾರವನ್ನು ತುಂಡು ಮಾಡುವುದು ಅತ್ಯಾಚಾರ ಅಥವಾ ಅತ್ಯಾಚಾರ ಯತ್ನದ ಅಪರಾಧ ಆಗುವುದಿಲ್ಲ ಎಂದಿರುವ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅವರು ಶುಕ್ರವಾರ ಒತ್ತಾಯಿಸಿದರು.
ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ, 'ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಒಪ್ಪಲು ಸಾಧ್ಯವಿಲ್ಲ. ನಾಗರಿಕ ಸಮಾಜದಲ್ಲಿ ಇಂಥ ತೀರ್ಪಿಗೆ ಜಾಗವಿಲ್ಲ' ಎಂದು ಕಟುವಾಗಿ ಹೇಳಿದರು.
'ಇಂಥ ತೀರ್ಪಿನಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಸಮಾಜದಲ್ಲಿ ಋಣಾತ್ಮಕ ಪರಿಣಾಮ ಬೀರುತ್ತದೆ' ಎಂದು ಹೇಳಿದರು.
2021ರಲ್ಲಿ 11 ವರ್ಷದ ಬಾಲಕಿಯ ಮೇಲೆ ಇಬ್ಬರು ದಾಳಿ ನಡೆಸಿದ್ದರು. ಆದರೆ ಆರೋಪಿಗಳು ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗುವ ತೀರ್ಮಾನ ಮಾಡಿದ್ದರು ಎಂಬುದನ್ನು ಸೂಚಿಸುವ ಯಾವುದೇ ಅಂಶಗಳು ಇಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ಸ್ವಾತಿ ಮಾಲೀವಾಲ್ ರಾಜ್ಯಸಭಾ ಸದಸ್ಯೆಅಲಹಾಬಾದ್ ಹೈಕೋರ್ಟ್ ತೀರ್ಪು ನಾಚಿಕೆಗೇಡು ಮತ್ತು ಅದನ್ನು ಒಪ್ಪಲು ಸಾಧ್ಯವೇ ಇಲ್ಲ. ಅವರು ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದಾರೆ? ಬಾಲಕಿಯೊಬ್ಬಳು ಭೀಕರ ದೌರ್ಜನ್ಯಕ್ಕೆ ಒಳಗಾಗಿದ್ದಾಳೆ. ಆದರೂ ಅದನ್ನು ಅತ್ಯಾಚಾರ ಎಂದು ಪರಿಗಣಿಸುವುದಿಲ್ಲ ಎಂದರೆ ಏನರ್ಥ?