ಕುಂಬಳೆ: ಅಂಗಡಿಮೊಗರು ಸಮೀಪದ ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮೇ.6 ರಿಂದ 12 ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ.ವಿರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು.
ಭಾನುವಾರ ಬೆಳಗ್ಗೆ ನಡೆದ ಸರಳ ಕಾರ್ಯಕ್ರಮದಲ್ಲಿ ದೇಲಂಪಾಡಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಹಾಗೂ ಆರಾಧನ ಸಂಪ್ರದಾಯವನ್ನು ಶ್ಲಾಘಿಸಿದ ಹೆಗ್ಗಡೆಯವರು, ಬ್ರಹ್ಮಕಲಶೋತ್ಸವ ಸಾಂಗವಾಗಿ ನೇರೆವೇರಲೆಂದು ಶುಭ ಹಾರೈಸಿ ಮಂತ್ರಾಕ್ಷತೆಯನ್ನಿತ್ತು ಹರಸಿದರು. ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಿ.ದಾಮೋದರನ್, ಉಪಾಧ್ಯಕ್ಷ ಡಿ.ಎನ್ ರಾಧಾಕೃಷ್ಣ, ಸೇವಾ ಸಮಿತಿ ಕಾರ್ಯದರ್ಶಿ ಕೇಶವ ಮಾಸ್ತರ್, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳಾದ ಭಾಸ್ಕರನ್ ಡಿ.ಕೆ, ರತ್ನಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.