ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸುವ ದೇಶದ ಅತಿದೊಡ್ಡ ಸಂಸ್ಥೆಗಳಲ್ಲಿ ಒಂದಾಗಿರುವ 'ಸ್ಟಾಫ್ ಸೆಲೆಕ್ಷನ್ ಕಮಿಷನ್' (ಎಸ್ಎಸ್ಸಿ), ಅಭ್ಯರ್ಥಿಗಳ ಗುರುತು ಪರಿಶೀಲಿಸಲು ಸ್ವಯಂಪ್ರೇರಿತ 'ಆಧಾರ್' ಆಧಾರಿತ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ.
ಮುಂದಿನ ತಿಂಗಳಿಂದ ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಈ ಹೊಸ ಕ್ರಮಗಳು ಜಾರಿಗೆ ಬರಲಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿನ ಗೆಜೆಟೆಡ್ ಅಲ್ಲದ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡುವ ಅಧಿಕಾರವನ್ನು ಎಸ್ಎಸ್ಸಿ ಹೊಂದಿದೆ.
'ಅಭ್ಯರ್ಥಿಗಳು ಪರೀಕ್ಷೆಗಾಗಿ ಆನ್ಲೈನ್ನಲ್ಲಿ ಅರ್ಜಿ ಭರ್ತಿ ಮಾಡಿ ನೋಂದಾಯಿಸುವ ವೇಳೆಯಲ್ಲಿಯೇ ಆಧಾರ್ ನಮೂದಿಸಬೇಕು ಮತ್ತು ಪರೀಕ್ಷಾ ಕೇಂದ್ರ ಪ್ರವೇಶಿಸುವಾಗ ಆಧಾರ್ ಬಳಸಿ ತಮ್ಮನ್ನು ದೃಢೀಕರಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ. ಅದಾಗ್ಯೂ ಇದು ಸ್ವಯಂಪ್ರೇರಿತವಾಗಿದ್ದು, ಇದರಿಂದ ಪರೀಕ್ಷಾ ಪ್ರಕ್ರಿಯೆ ಸುಗಮವಾಗಲಿದೆ ಎಂದು ಅದು ಹೇಳಿದೆ.